ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ನಾಳೆ, ಜೂನ್‌ 11 ರಂದು ಚಾಲನೆ ನೀಡಲಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಕಾರ್ಯಗತವಾಗಿರುವ ಮೊದಲ ಯೋಜನೆ ಇದಾಗಿದ್ದು, ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳೊಳಗಾಗಿ ಜಾರಿಗೊಳ್ಳುತ್ತಿರುವುದು ಗಮನಾರ್ಹ. 

ರಾಜ್ಯಾದ್ಯಂತ ನಾಳೆ ಮಧ್ಯಾಹ್ನ 1 ಗಂಟೆಯಿಂದ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಫ್ರೀ ಫ್ರೀ

ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ʼಶಕ್ತಿʼ ಯೋಜನೆಗೆ ಚಾಲನೆ ನೀಡುವ ಮೂಲಕ ಮಹಿಳಾ ಸಬಲೀಕರಣದತ್ತ ಹೊಸ ಹೆಜ್ಜೆಗೆ ಮುನ್ನುಡಿ ಬರೆಯಲಿದ್ದಾರೆ. ಇದೇ ಸಂದರ್ಭದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವವ್ಯಾಪ್ತಿಯಲ್ಲಿ ಶಾಸಕರು ಈ ಯೋಜನೆಗೆ ಚಾಲನೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಮಧ್ಯಾಹ್ನ 1.00 ಗಂಟೆಯ ನಂತರ ಮಹಿಳಾ ಪ್ರಯಾಣಿಕರಿಗೆ ಈ ಸೌಲಭ್ಯ ದೊರೆಯಲಿದೆ. 

41.8 ಲಕ್ಷ ಮಹಿಳೆಯರಿಗೆ ಅನುಕೂಲ

ʼಉಚಿತ ಪ್ರಯಾಣʼ ಯೋಜನೆಯು ಪ್ರತಿದಿನ 41.8 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಅನುಕೂಲವಾಗಲಿದೆ. ಬಡ ಮತ್ತು ಕೆಳ ಮಧ್ಯಮ ವರ್ಗದ ದುಡಿಯುವ ಮಹಿಳೆಯರ ದಿನದ ಖರ್ಚಿನ ಹೊರೆಯನ್ನು ಇಳಿಸಿ, ಮಹಿಳಾ ಸಬಲೀಕರಣಕ್ಕೆ ಈ ಯೋಜನೆ ಹೊಸ ಭಾಷ್ಯ ಬರೆಯಿದೆ. ಉಳಿತಾಯವಾಗುವ ಪ್ರಯಾಣದ ವೆಚ್ಚ ಕುಟುಂಬದ ನಿರ್ವಹಣೆಗೆ ಬಳಕೆಯಾಗುವುದರಿಂದ ಮಹಿಳೆಯರಲ್ಲಿ ಸ್ವಾವಲಂಬನೆಯ ಭಾವ ಮೂಡಿಸಿದೆ. 

ಲಿಂಗತ್ವ ಅಲ್ಪಸಂಖ್ಯಾತರಿಗೂ ʼಶಕ್ತಿʼ

ಜಾತಿ, ಮತ, ವರ್ಗಗಳ ಭೇದವಿಲ್ಲದೆ ವಿದ್ಯಾರ್ಥಿನಿಯೂ ಸೇರಿದಂತೆ ಎಲ್ಲ ಮಹಿಳೆಯರು ಈ ಸೌಲಭ್ಯ ಪಡೆಯಬಹುದಾಗಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಯೋಜನೆಯ ಅನುಕೂಲ ದೊರೆಯಲಿದೆ. ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದ್ದು, 18,609 ಬಸ್‌ಗಳ ಸೇವೆಯು ಉಚಿತ ಪ್ರಯಾಣಕ್ಕೆ ಲಭ್ಯವಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ಕೆ.ಎಸ್. ಆರ್.ಟಿ.ಸಿ, ಬಿಎಂಟಿಸಿ, ಎನ್‌.ಡಬ್ಲ್ಯು.ಕೆ.ಆರ್.ಟಿ.ಸಿ; ಹಾಗೂ ಎನ್‌.ಇ.ಕೆ.ಆರ್.ಟಿ.ಸಿ. ಬಸ್‌ ಗಳಲ್ಲಿ ಈ ಸೌಲಭ್ಯ ಒದಗಿಸಲಾಗುತ್ತಿದೆ.
ಈ ಯೋಜನೆಗೆ ವಾರ್ಷಿಕವಾಗಿ 4051.56 ಕೋಟಿ ರೂ. ವೆಚ್ಚವಾಗುವುದು ಎಂದು ಅಂದಾಜಿಸಲಾಗಿದೆ.