ಬೆಂಗಳೂರು: ರಾಜ್ಯದಲ್ಲಿ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣಗಳ ವೈಮಾನಿಕ ಸೇವೆ ಮತ್ತು ನಿರ್ವಹಣೆಯನ್ನು ಭಾರೀ ಕೈಗಾರಿಕಾ ಇಲಾಖೆಯಡಿ ಬರುವ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ತೆಗೆದುಕೊಳ್ಳುವ ಕುರಿತು ಗಂಭೀರವಾಗಿ ಆಲೋಚಿಸಲಾಗುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಸದ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣವು ಕಾರ್ಯಾಚರಣೆಗೆ ಸಿದ್ಧವಾಗಿದೆ. ಇದರ ನಿರ್ವಹಣೆಗೆ ಕೇಂದ್ರ ವಿಮಾನಯಾನ‌ ನಿರ್ದೇಶನಾಲಯ ಒಪ್ಪಿಗೆ ನೀಡಿದೆ. ಅದೇ ರೀತಿ ನಿರ್ಮಾಣ ಹಂತದಲ್ಲಿ ಇರುವ ವಿಜಯಪುರ ಮತ್ತು ಹಾಸನ ವಿಮಾನ ನಿಲ್ದಾಣಗಳನ್ನೂ ಆಪರೇಟ್ ಮಾಡುವ ಉದ್ದೇಶ ಇದೆ. ರಾಜ್ಯದಲ್ಲಿ ಇನ್ನು‌ ಮುಂದಿನ ದಿನಗಳಲ್ಲಿ ನಿರ್ಮಿಸುವ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಣೆ ಮಾಡುವುದು ಒಳ್ಳೆಯದು. ಇದರಿಂದ ನಮಗೆ ಆರ್ಥಿಕವಾಗಿ ಲಾಭವಾಗಲಿದೆ" ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿನ ಶಿರಡಿಯಲ್ಲಿರುವ ವಿಮಾನ ನಿಲ್ದಾಣವನ್ನು ಅಲ್ಲಿನ ಸರಕಾರವೇ ನಿರ್ವಹಿಸುತ್ತಿದೆ. ಹಾಗೆಯೇ, 2-3 ರಾಜ್ಯಗಳು ಈ ಮಾದರಿಯನ್ನು ಅನುಸರಿಸುತ್ತಿವೆ. ರಾಜ್ಯದಲ್ಲಿ ಕೊನೆಪಕ್ಷ ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಿಸಿದರೆ ಆಗುವ ಲಾಭ-ನಷ್ಟಗಳನ್ನು ಕುರಿತು ಚರ್ಚಿಸಲಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಲಬುರಗಿಯಲ್ಲಿ ರಾಜ್ಯ ಸರಕಾರವು 1,000 ಕೋಟಿ ರೂ. ಖರ್ಚು ಮಾಡಿ ವಿಮಾನ ನಿಲ್ದಾಣ ನಿರ್ಮಿಸಿದೆ. ಆದರೆ, ಅದನ್ನು ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಬಿಟ್ಟು ಕೊಟ್ಟಿದ್ದೇವೆ. ಇದರ ಬದಲು ನಾವೇ ನಿರ್ವಹಣೆಯನ್ನು ಹೊತ್ತುಕೊಂಡರೆ ಅದರಿಂದ ಪ್ರಯೋಜನವಾಗಲಿದೆ. ಇಂತಹ ಚಿಂತನೆ ಈಗ ದೇಶದ ಹಲವು ರಾಜ್ಯಗಳಲ್ಲಿ ಮುನ್ನೆಲೆಗೆ ಬಂದಿದೆ. ಇದರಿಂದ ಸ್ಥಳೀಯವಾಗಿ ಹೆಚ್ಚು ಲಾಭವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಚಾಣಕ್ಯ ವಿವಿಗೆ ಭೂಮಿ: ಸದ್ಯಕ್ಕೆ ಹಿಂದಕ್ಕಿಲ್ಲ

ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಹಿಂದಿನ ಬಿಜೆಪಿ ಸರಕಾರ ಮಂಜೂರು ಮಾಡಿರುವ ಭೂಮಿಯನ್ನು ವಾಪಸ್‌ ಪಡೆಯುವ ವಿಚಾರ ಸದ್ಯಕ್ಕೆ ನಮ್ಮ ಮುಂದಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸುತ್ತಾರೆ. ಆದರೆ, ಹಿಂದಿನ ಅವಧಿಯಲ್ಲಿ ಭೂಮಿ ಹಂಚಿಕೆಯಲ್ಲಿ ಎಲ್ಲೆಲ್ಲೆ ದುರ್ಬಳಕೆ ಆಗಿದೆಯೋ ಅದರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಆಗಿರುವ ಭೂಮಿ ಹಂಚಿಕೆಯನ್ನು ಪ್ರತಿಯೊಂದು ಕಡೆಯೂ ಪರಿಶೀಲಿಸುತ್ತೇವೆ ಎಂದು ಪಾಟೀಲ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.